ಇತ್ತೀಚಿನ ಸುದ್ದಿ
ಆಸ್ಪತ್ರೆ, ಶಾಲಾ ಆವರಣ ಕ್ಯಾಂಟೀನ್ಗಳಲ್ಲಿ ಜಂಕ್ ಫುಡ್ ನಿಷೇಧಕ್ಕೆ ಚಿಂತನೆ: ಆರೋಗ್ಯ ಸಚಿವ ಯು.ಟಿ. ಖಾದರ್
19/07/2026, 23:23
ಮಂಗಳೂರು(reporterkarnataka.com):ರಾಜ್ಯದ ಎಲ್ಲ ಆಸ್ಪತ್ರೆ ಹಾಗೂ ಶಾಲೆಗಳ ಆವರಣದಲ್ಲಿರುವ ಕ್ಯಾಂಟೀನ್ಗಳಲ್ಲಿ ಆರೋಗ್ಯಕರ ಆಹಾರಗಳನ್ನು ಮಾತ್ರ ಕನಿಷ್ಠ ದರದಲ್ಲಿ ಮಾರಾಟ ಮಾಡಬೇಕು. ಇದನ್ನು ಹೊರತುಪಡಿಸಿ ಯಾವುದೇ ರೀತಿಯ ಜಂಕ್ ಫುಡ್ಗಳನ್ನು ಮಾರಾಟ ಮಾಡುವಂತಿಲ್ಲ. ರಾಜ್ಯಾದ್ಯಂತ ಈ ನಿಯಮ ಜಾರಿಗೆ ತರಲು ಚಿಂತನೆ ನಡೆಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ.ಖಾದರ್ ಹೇಳಿದರು.
ಮಂಗಳೂರಿನ ವೆನ್ಲಾಕ್ ಸರ್ಕಾರಿ ಜಿಲ್ಲಾ ಆಸ್ಪತ್ರೆಯಲ್ಲಿ ಶನಿವಾರ ಕುಂದುಕೊರತೆ ಹಾಗೂ ಅಭಿವೃದ್ಧಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಎಲ್ಲ ಆಸ್ಪತ್ರೆಗಳ ಹಾಗೂ ಶಾಲೆಗಳ ಕ್ಯಾಂಟೀನ್ಗಳಲ್ಲಿ ಜಂಕ್ ಆಹಾರ ಮಾರಾಟ ಎಗ್ಗಿಲ್ಲದೆ ನಡೆಯುತ್ತಿದೆ. ಇದಕ್ಕೆ ವಿಪರೀತವಾಗಿ ಅವಲಂಬನೆಯಾಗಿರುವುದು ಕೂಡ ಸಾಕಷ್ಟು ರೋಗಗಳಿಗೆ ಆಹ್ವಾನ ನೀಡಿದಂತಾಗುತ್ತದೆ. ಕ್ಯಾನ್ಸರ್, ಮೂತ್ರಪಿಂಡ ಮೊದಲಾದ ಸಾಂಕ್ರಾಮಿಕವಲ್ಲದ ಕಾಯಿಲೆಗಳು ಹೆಚ್ಚುತ್ತಿವೆ. ಇದನ್ನು ಶಾಲಾ ಅಥವಾ ಆಸ್ಪತ್ರೆ ಹಂತದಲ್ಲೇ ನಿಯಂತ್ರಿಸಿದರೆ, ಕನಿಷ್ಠ ದೇಹದ ಆರೋಗ್ಯವನ್ನೂದರೂ ಕಾಪಾಡಲು ಸಾಧ್ಯವಿದೆ. ಅದಕ್ಕಾಗಿ ಆಸ್ಪತ್ರೆ ಮಾತ್ರವಲ್ಲ ಒಂದರಿಂದ 10ನೇ ತರಗತಿವರೆಗೆ ಇರುವ ಶಾಲೆಗಳ ಸುತ್ತಮುತ್ತ ಕೂಡ ಜಂಕ್ ಫುಡ್ ಮಾರಾಟಕ್ಕೆ ಅವಕಾಶ ನೀಡದಂತೆ ನಿಯಮ ಜಾರಿಗೊಳಿಸಲು ಉದ್ದೇಶಿಸಲಾಗಿದೆ ಎಂದರು.
ಇದಕ್ಕೆ ಪೂರಕವಾಗಿ ಆಹಾರ ಮತ್ತು ಸುರಕ್ಷತಾ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಅನುಷ್ಠಾನಕ್ಕೆ ತರಲು ತೀರ್ಮಾನಿಸಲಾಗಿದೆ. ಮಾಲ್ ಸೇರಿದಂತೆ ವಿವಿಧ ಕಡೆಗಳಲ್ಲಿ ಮಾರಾಟ ಮಾಡುವ ಆಹಾರ ವಸ್ತುಗಳ ಗುಣಮಟ್ಟವನ್ನು ಕಡ್ಡಾಯವಾಗಿ ಪರೀಕ್ಷೆಗೆ ಒಳಪಡಿಸಿ, ಗುಣಮಟ್ಟ ರಹಿತ ಆಹಾರ ವಸ್ತುಗಳ ಮಾರಾಟವನ್ನು ನಿರ್ಬಂಧಿಸಲಾಗುವುದು. ಮಾತ್ರವಲ್ಲ ಅಂತಹವುಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಬೆಂಗಳೂರಿನಲ್ಲಿ ಹಾಲಿ ಇರುವ ಆಹಾರ ಗುಣಮಟ್ಟ ತಪಾಸಣಾ ಲ್ಯಾಬ್ನ್ನು ಅತ್ಯುತ್ಕೃಷ್ಟ ಮಟ್ಟದಲ್ಲಿ ಮೇಲ್ದರ್ಜೆಗೆ ಪಿಪಿಪಿ ಮಾದರಿಯಲ್ಲಿ ಏರಿಸಲು ನಿರ್ಧರಿಸಲಾಗಿದೆ. ಅಲ್ಲಿ ಆಹಾರ ವಸ್ತುಗಳ ತಪಾಸಣೆ ನಡೆಸಿ ನೀಡುವ ವರದಿಯನ್ನು ಸುಪ್ರೀಂ ಕೋರ್ಟ್ ಕೂಡ ಸಮ್ಮತಿಸುವಂತೆ ಇರಬೇಕು ಎಂದರು.













