ಇತ್ತೀಚಿನ ಸುದ್ದಿ
ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3 ಡಿಮ್ಯಾಂಡ್ಗಳನ್ನಿಟ್ಟ ಪ್ರತಿಪಕ್ಷ ನಾಯಕ
22/07/2026, 21:38
ನವದೆಹಲಿ(reporterkarnataka.com): ನೀಟ್ ಪರೀಕ್ಷೆ ಅಕ್ರಮ ಮತ್ತು ಸಿಜೆಪಿ ಕಾರ್ಯಕರ್ತರ ಮೇಲೆ ಲಾಠಿಚಾರ್ಜ್ ಹಾಗೂ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯಿಸಿ ನಿನ್ನೆ ದೆಹಲಿಯಲ್ಲಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದ್ರು. ಪ್ರತಿಭಟನೆ ವೇಳೆ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಹಾಗೂ ಕಾಂಗ್ರೆಸ್ ನಾಯಕರನ್ನ ಬಲವಂತವಾಗಿ ಪೊಲೀಸರು ವಶಕ್ಕೆ ಪಡೆದಿದ್ದರು. ಇದನ್ನ ಖಂಡಿಸಿ ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸುದ್ದಿಗೋಷ್ಟಿ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಜೊತೆಗೆ ಮೂರು ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟಿದ್ದಾರೆ.
*ರಾಹುಲ್ ಗಾಂಧಿ ಹೇಳಿದ್ದೇನು?*
ದೆಹಲಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿರುವ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ, ಪ್ರತಿ ತಿಂಗಳು ಸರಿಸುಮಾರು ಒಂದಲ್ಲ ಒಂದು ಪತ್ರಿಕೆ ಸೋರಿಕೆಯಾಗುತ್ತಲೇ ಇದೆ. ಪೇಪರ್ ಲೀಕ್ ಘಟನೆ ಸುಮಾರು 7.5 ಕೋಟಿ ವಿದ್ಯಾರ್ಥಿಗಳ ಮೇಲೆ ಪರಿಣಾಮ ಬೀರಿದೆ. ಆದ್ರೆ, ಕಳೆದ ದಶಕದಲ್ಲಿ ಯಾವುದೇ ಶಿಕ್ಷೆ ಇಲ್ಲ. ಒಂದು ಗುಂಪಿನ ಜನರು ನಮ್ಮ ಶಿಕ್ಷಣ ವ್ಯವಸ್ಥೆಯನ್ನು ನಾಶಪಡಿಸುತ್ತಿದ್ದಾರೆ. ನಮ್ಮ ಯುವಕರು ಪ್ರತಿಭಟಿಸುತ್ತಿರುವುದಕ್ಕೆ ಇದೇ ಕಾರಣ. ಕಳೆದ ದಶಕದಲ್ಲಿ ಕನಿಷ್ಠ 152 ಪತ್ರಿಕೆ ಸೋರಿಕೆಯಾಗಿದೆ ಎಂದು ರಾಹುಲ್ ಗಾಂಧಿ ಆರೋಪ ಮಾಡಿದ್ರು.












