2:43 PM Wednesday6 - May 2026
ಬ್ರೇಕಿಂಗ್ ನ್ಯೂಸ್
ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ… ಮಗ ಸಿಎಂ ಆಗೋ ಖುಷಿಯಲ್ಲಿ ದೇವಸ್ಥಾನಕ್ಕೆ ಹೋಗಿ ಪ್ರಾರ್ಥನೆ ಸಲ್ಲಿಸಿದ ವಿಜಯ್‌ ತಂದೆ-ತಾಯಿ ಕೊಡವರಿಗೆ ಪ್ರತ್ಯೇಕ ಲೋಕಸಭೆ, ವಿಧಾನಸಭಾ ಕ್ಷೇತ್ರಕ್ಕೆ ಆಗ್ರಹ: ಸಿಎನ್‍ಸಿಯಿಂದ ಅಭಿಯಾನ ಆರಂಭ

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ ಮಹಿಳೆಯ ಮೇಲೆ 1400ಕ್ಕೂ ಹೆಚ್ಚು ಕೌಟುಂಬಿಕ ದೌರ್ಜನ್ಯ ಪ್ರಕರಣ ದಾಖಲು: ರಾಜ್ಯ ಮಹಿಳಾ ಆಯೋಗ ಕಳವಳ

01/03/2023, 18:20

ಮಂಗಳೂರು(reporter Karnataka.com): ರಾಜ್ಯ ಮಹಿಳಾ ಆಯೋಗವು ಅತ್ಯಂತ ಪಾರದರ್ಶಕವಾಗಿ ಕಾರ್ಯನಿರ್ವಹಿಸುತ್ತಿದ್ದು, ದೂರು ದಾಖಲಾದ ಕೆಲವೇ ದಿನದಲ್ಲಿ ಪರಿಹಾರ ಕಲ್ಪಿಸಲಾಗುತ್ತಿದೆ ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಪ್ರಮೀಳಾ ಆರ್. ನಾಯ್ಡು ಹೇಳಿದರು.

ಅವರು ಬುಧವಾರ ನಗರದ ಜಿಲ್ಲಾ ಪಂಚಾಯತ್ ನ ವಿಡಿಯೋ ಸಂವಾದ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ರಾಜ್ಯ ಮಹಿಳಾ ಆಯೋಗವು ಮಹಿಳೆಯರ ಮೇಲಿನ ದೌರ್ಜನ್ಯ ಹಾಗೂ ಇತರೆ ಪ್ರಕರಣಗಳಲ್ಲಿ ಮಹಿಳೆಯರನ್ನು ರಕ್ಷಿಸಲು ಸಶಕ್ತವಾಗಿ ಕಾರ್ಯನಿರ್ವಹಿಸುತ್ತಿದ್ದು, ದೌರ್ಜನ್ಯ, ಕೌಟುಂಬಿಕ ದೌರ್ಜನ್ಯ, ಹಲ್ಲೆ ಸೇರಿದಂತೆ ಹಲವು ಪ್ರಕರಣಗಳಲ್ಲಿ ದಾಖಲಾದ ದೂರುಗಳನ್ನು ಕೂಡಲೇ ಇತ್ಯರ್ಥ ಪಡಿಸಲು ಹಾಗೂ ನೊಂದ ಮಹಿಳೆಯರಿಗೆ ನ್ಯಾಯಕೊಡಿಸುವ ಕೆಲಸ ಮಾಡುತ್ತಿದೆ ಕೆಲವೊಂದು ಪ್ರಕರಣಗಳಲ್ಲಿ ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿ ಕೊಂಡು ಪರಿಹಾರ ಕಲ್ಪಿಸಲಾಗುತ್ತಿದೆ ಎಂದರು.
2020ರಿಂದ ಮಹಿಳಾ ಆಯೋಗವು ರಾಜ್ಯದಲ್ಲಿ 6,728 ದೂರುಗಳನ್ನು ಸ್ವೀಕರಿಸಿದೆ. ಇವುಗಳಲ್ಲಿ 4,120ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದ್ದು, ವಿವಿಧ ಹಂತಗಳಲ್ಲಿ 2,608 ಪ್ರಕರಣಗಳು ಇತ್ಯರ್ಥಕ್ಕೆ ಬಾಕಿಯಿವೆ. ಈ ದೂರುಗಳ ಪೈಕಿ 1,400ಕ್ಕೂ ಹೆಚ್ಚು ಪ್ರಕರಣಗಳು ಕೌಟುಂಬಿಕ ಹಿಂಸಾಚಾರಕ್ಕೆ ಸಂಬಂಧಿಸಿದ್ದರೆ, 1,905 ಪ್ರಕರಣಗಳು ರಕ್ಷಣೆ ಕೋರಿ, 347 ವರದಕ್ಷಿಣೆ ಕಿರುಕುಳ, 26 ವರದಕ್ಷಿಣೆ ಸಾವು/ಕೊಲೆ, 37 ಲೈಂಗಿಕ ದೌರ್ಜನ್ಯ, 208 ಪೊಲೀಸ್ ದೌರ್ಜನ್ಯ ಪ್ರಕರಣಗಳಾಗಿವೆ ಎಂದರು.
ರಾಜ್ಯದಲ್ಲಿ ಕಳೆದ ಮೂರು ವರ್ಷಗಳಲ್ಲಿ ಕೆಲಸದ ಸ್ಥಳದಲ್ಲಿ ಲೈಂಗಿಕ ಕಿರುಕುಳಕ್ಕೆ ಸಂಬಂಧಿಸಿದಂತೆ 280 ಪ್ರಕರಣಗಳನ್ನು ಸ್ವೀಕರಿಸಲಾಗಿದ್ದು, ಇದುವರೆಗೆ 151 ಪ್ರಕರಣಗಳನ್ನು ಪರಿಹರಿಸಲಾಗಿದೆ. ಕೆಲಸದ ಸ್ಥಳದಲ್ಲಿ ಲೈಂಗಿಕ ಕಿರುಕುಳ ತಡೆಗಟ್ಟಲು ಆಂತರಿಕ ದೂರು ಸಮಿತಿ ರಚಿಸುವಂತೆ 2,500 ಕಂಪೆನಿಗಳಿಗೆ ಪತ್ರ ಬರೆದಿದ್ದು, ಇದುವರೆಗೆ 1,100 ಕಂಪೆನಿಗಳಿಂದ ಉತ್ತರ ಸ್ವೀಕರಿಸಲಾಗಿದೆ ಎಂದರು.

ದಕ್ಷಿಣ ಕನ್ನಡ ಜಿಲ್ಲೆಯ ಸಿಡಿಪಿಒ ಕಚೇರಿಗಳಲ್ಲಿ ಒಟ್ಟು 722 ಪ್ರಕರಣಗಳು ದಾಖಲಾಗಿದ್ದು, ಇದರಲ್ಲಿ 520 ಪ್ರಕರಣಗಳನ್ನು ಸಂಧಾನದ ಮೂಲಕ ಪರಿಹರಿಸಲಾಗಿದ್ದರೆ, 170 ಪ್ರಕರಣಗಳು ನ್ಯಾಯಾಲಯದಲ್ಲಿವೆ ಎಂದವರು ಹೇಳಿದರು.
ಆಯೋಗವು ಕೌಟುಂಬಿಕ ಕಲಹ ಪ್ರಕರಣಗಳಲ್ಲಿ ಕೌನ್ಸಿಲಿಂಗ್ ಮೂಲಕ ಕುಟುಂಬ ಪುನರ್ಮಿಲನ ಒತ್ತು ನೀಡುತ್ತಿದೆ, ಅಲ್ಲದೆ, ಹದಿಹರೆಯದವರಲ್ಲಿ ಪ್ರೇಮ ಪ್ರಕರಣಗಳು, ಲಿವ್ ಇನ್ ರಿಲೇಶನ್‌ಶಿಪ್ ಮತ್ತು ಸೈಬರ್ ಅಪರಾಧಗಳ ಕುರಿತು ಶಾಲೆ- ಕಾಲೇಜುಗಳಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.

ಜಿಲ್ಲೆಯಲ್ಲಿ ಮಹಿಳೆಯರ ಸ್ಥಿತಿಗತಿ ಕುರಿತು ನೆನ್ನೆ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಕೂಲಂಕುಶವಾಗಿ ಸಭೆ ನಡೆಸಲಾಗಿದೆ, ಕೌಟುಂಬಿಕ ದೌರ್ಜನ್ಯ ಪ್ರಕರಣಗಳು ಹಾಗೂ ವಿವಾಹೇತರ ಸಂಬಂಧಗಳ ಬಗ್ಗೆ ಹೆಚ್ಚಿನ ಪ್ರಕರಣಗಳು ಜಿಲೆಯಲ್ಲಿ ಕಂಡುಬಂದಿವೆ ಎಂದು ತಿಳಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಾಧಿಕಾರಿ ಡಾ. ಕುಮಾರ್ ಅವರು ಮಾತನಾಡಿದರು, ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಪಾಪ ಭೋವಿ ಗೋಷ್ಠಿಯಲ್ಲಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು