ಇತ್ತೀಚಿನ ಸುದ್ದಿ
Shivamogga | ಚಿಕಿತ್ಸೆ ನೀಡಲು ತೆರಳಿದ್ದ ವೇಳೆ ನೀರಾನೆ ದಾಳಿ: ಯುವ ವೈದ್ಯೆ ದಾರುಣ ಸಾವು
20/03/2026, 12:34
ಶಿವಮೊಗ್ಗ(reporterkarnataka.com): ಶಿವಮೊಗ್ಗದ ತಾವರೆಕೊಪ್ಪ ಹುಲಿ ಸಿಂಹ ಧಾಮದಲ್ಲಿ ಗುರುವಾರ ತಡರಾತ್ರಿ ಚಿಕಿತ್ಸೆ ನೀಡಲು ತೆರಳಿದ್ದ ವೇಳೆ ನೀರಾನೆ ದಾಳಿಯಿಂದ ತೀವ್ರ ಗಾಯಗೊಂಡಿದ್ದ ವನ್ಯಜೀವಿ ವೈದ್ಯೆ ಡಾ.ಸಮೀಕ್ಷಾ ರೆಡ್ಡಿ ಚಿಕಿತ್ಸೆ ಫಲಕಾರಿಯಾಗದೇ ಶುಕ್ರವಾರ ಬೆಳಿಗ್ಗೆ ನಿಧನರಾಗಿದ್ದಾರೆ.
ಸಮೀಕ್ಷಾ ರೆಡ್ಡಿ (26) ಮೂಲತಃ ಬೆಂಗಳೂರಿನ ಬನ್ನೇರುಘಟ್ಟ ನಿವಾಸಿ. ಹೆಬ್ಬಾಳದ ಪಶುವೈದ್ಯಕೀಯ ಕಾಲೇಜಿನಲ್ಲಿ (ಜಿಕೆವಿಕೆ) ಪದವಿ ಮುಗಿಸಿದ್ದ ಅವರು ಒಂದೂವರೆ ತಿಂಗಳ ಹಿಂದಷ್ಟೇ ಇಲ್ಲಿನ ಹುಲಿ ಸಿಂಹ ಧಾಮಕ್ಕೆ ತರಬೇತಿಗೆ ನೇಮಕಗೊಂಡಿದ್ದರು.
ಗರ್ಭಿಣಿ ಆಗಿದ್ದ ನೀರಾನೆ ಇನ್ಜು ನಾಲ್ಕು ದಿನಗಳಲ್ಲಿ ಅದರ ಹೆರಿಗೆಗೆ ದಿನ ನಿಗದಿಯಾಗಿತ್ತು. ಅದು ರಾತ್ರಿ ಆಹಾರ ಸೇವಿಸಿರದ ಕಾರಣ ಪರಿಶೀಲನೆಗೆ ಡಾ.ಸಮೀಕ್ಷಾ ಅದರ ನೆಲೆಯತ್ತ ತೆರಳಿದ್ದಾರೆ. ಈ ವೇಳೆ ಆ ನೀರಾನೆ ದಾಳಿ ಮಾಡಿದೆ. ತೀವ್ರ ರಕ್ತ ಸ್ರಾವದಿಂದ ಪ್ರಜ್ಞಾಹೀನರಾಗಿದ್ದ ಅವರನ್ನು ಮೃಗಾಲಯ ಸಿಬ್ಬಂದಿ ಇಲ್ಲಿನ ಮ್ಯಾಕ್ಸ್ ಆಸ್ಪತ್ರೆಗೆ ದಾಖಲಿಸಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಅವರು ಸಾವನ್ನಪ್ಪಿದ್ದಾರೆ.
ತನಿಖೆಗೆ ಸೂಚನೆ: ಸಮೀಕ್ಷಾ ರೆಡ್ಡಿ ಚಿಕಿತ್ಸೆ ನೀಡಲು ತೆರಳಿದ್ದ ವೇಳೆ ಅಲ್ಲಿ ಸುರಕ್ಷತಾ ನಿಯಮಗಳ ಪಾಲನೆಯಾಗಿದ್ದವೇ ಎಂಬುದರ ಬಗ್ಗೆ ತನಿಖೆ ನಡೆಸಿ ಏಳು ದಿನಗಳ ಒಳಗೆ ವರದಿ ನೀಡುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅವರು ಶಿವಮೊಗ್ಗದ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.












