5:40 AM Sunday10 - May 2026
ಬ್ರೇಕಿಂಗ್ ನ್ಯೂಸ್
ನಂಜನಗೂಡು ತಾಲೂಕು ಮಟ್ಟದ ಕ್ರಿಕೆಟ್ ಪಂದ್ಯಾವಳಿ: ಚಿಕ್ಕರಂಗನಾಯಕ ಚಾಲನೆ ಚಿಕ್ಕಮಗಳೂರು | ಕಾಡಿನೊಳಗೂ ಕಳ್ಳರ ಕೈಚಳಕ: ಮುತ್ತೋಡಿ ಅರಣ್ಯ ವಲಯದಲ್ಲಿದ್ದ ಕ್ಯಾಮೆರಾ ಹೊತ್ತೊಯ್ದ… ಚಾಲಕನಿಗೆ ಹಠಾತ್ ಕಾಣಿಸಿಕೊಂಡ ಎದೆನೋವು: ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಮಗುಚಿದ ಖಾಸಗಿ… ಮೂಡಿಗೆರೆ: ಬಾಳೂರು ಪೊಲೀಸರ 12 ತಾಸುಗಳ ಕಾರ್ಯಾಚರಣೆ ಬಳಿಕ ಪತ್ತೆಯಾದ ಒಂದೂವರೆ ವರ್ಷದ… Shivamogga | ತೀರ್ಥಹಳ್ಳಿ: ವಾಹನದಲ್ಲಿ ಅಕ್ರಮ ಗೋ ಸಾಗಾಟ; ಮೂವರು ವಶಕ್ಕೆ ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ

ಇತ್ತೀಚಿನ ಸುದ್ದಿ

ಕಾವೇರಿ ಆರತಿಗಾಗಿ ವಿಶೇಷ ಗೀತೆ ರಚನೆ: ಡಿಸಿಎಂ ಡಿ.ಕೆ. ಶಿವಕುಮಾರ್ ಖ್ಯಾತ ಸಂಗೀತ ನಿರ್ದೇಶಕರಿಗೆ ಪತ್ರ

24/05/2025, 09:00

* ಖ್ಯಾತ ಸಂಗೀತ ನಿರ್ದೇಶಕರಾದ ಹಂಸಲೇಖ, ಸಾಧು ಕೋಕಿಲ ಹಾಗೂ ಅರ್ಜುನ್ ಜನ್ಯ ಅವರಿಗೆ ಡಿಸಿಎಂ ಪತ್ರ ಬರೆದು ಮನವಿ ಮಾಡಿದ್ದಾರೆ.

* ಕಾವೇರಿ ಪರಂಪರೆ, ಜಲ ಶ್ರೀಮಂತಿಕೆಯನ್ನೊಳಗೊಂಡ ಗೀತ ಸಾಹಿತ್ಯ ರಚನೆಗೆ ಮನವಿ

* ಕಾವೇರಿ ಆರತಿ ಸಂದರ್ಭದಲ್ಲಿ ಆಯ್ಕೆಯಾದ ಹಾಡು ಪ್ರಸಾರ: ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು(reporterkarnataka.com): ಕರ್ನಾಟಕದ ಹೆಮ್ಮೆಯ ಜೀವನದಿ ಕಾವೇರಿಗೆ ಗಂಗಾರತಿ ಮಾದರಿಯಲ್ಲಿ ‘ಕಾವೇರಿ ಆರತಿ’ ನಡೆಸುವ ರಾಜ್ಯ ಸರ್ಕಾರದ ಮಹತ್ವದ ನಿರ್ಧಾರಕ್ಕೆ ಪೂರಕವಾಗಿ, ವಿಶೇಷ ಗೀತೆಯೊಂದನ್ನು ರಚಿಸಲು ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ಜಲಮಂಡಳಿ ಮತ್ತು ಕಾವೇರಿ ಆರತಿ ಸಮಿತಿಯ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಅವರು ಖ್ಯಾತ ಸಂಗೀತ ನಿರ್ದೇಶಕರಾದ ಹಂಸಲೇಖ, ಸಾಧು ಕೋಕಿಲ ಹಾಗೂ ಅರ್ಜುನ್ ಜನ್ಯ ಅವರಿಗೆ ಪತ್ರ ಬರೆದಿದ್ದಾರೆ.
ರಾಜ್ಯ ಸರ್ಕಾರವು ಕಾವೇರಿ ಆರತಿಯನ್ನು ಸಾಂಸ್ಕೃತಿಕವಾಗಿ ಮತ್ತು ಸಾಹಿತ್ಯಾತ್ಮಕವಾಗಿ ಶ್ರೀಮಂತಗೊಳಿಸುವ ಉದ್ದೇಶವನ್ನು ಹೊಂದಿದೆ. ಈ ಹಿನ್ನೆಲೆಯಲ್ಲಿ ಜಾನಪದ ಸೊಬಗು, ಧಾರ್ಮಿಕತೆಯ ಮೆರಗು ಹಾಗೂ ಭಕ್ತಿ ಭಾವದಿಂದ ಕೂಡಿರುವ ಗೀತೆಯನ್ನು ರಚಿಸುವ ಅಗತ್ಯವಿದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.
ಬದಲಾದ ಕಾಲಘಟ್ಟಕ್ಕೆ ಹೊಂದಿಕೊಳ್ಳುವಂತೆ, ವರ್ಣರಂಜಿತವಾಗಿ ಮೂಡಿಬರಲಿರುವ ಈ ಗೀತೆಯು ಕಾವೇರಿ ಮಾತೆಯ ಸಂಪೂರ್ಣ ಚಿತ್ರಣವನ್ನು ಕಣ್ಣಿಗೆ ಕಟ್ಟುವಂತಿರಬೇಕು. ಕಾವೇರಿ ಮಾತೆಯ ಪರಂಪರೆಯನ್ನು ಉಳಿಸುವುದರ ಜೊತೆಗೆ, ಜಲ ಶ್ರೀಮಂತಿಕೆ ಸಹಿತ ಕಾವೇರಿ ವೈಭವವನ್ನು ದೇಶ ವಿದೇಶಗಳಿಗೆ ಹಾಡು ಮತ್ತು ಸಂಗೀತದ ಮೂಲಕ ಸಾರುವ ಹಾಗೂ ಆರತಿಯ ಮಹಿಮೆಯನ್ನು ಮೇಳೈಸುವ ಅದ್ಭುತವಾದ ಸಾಹಿತ್ಯ ಮತ್ತು ಗೀತ ಸಂಯೋಜನೆ ಆಗಬೇಕಿದೆ ಎಂದು ಡಿಸಿಎಂ ಶಿವಕುಮಾರ್ ಹೇಳಿದ್ದಾರೆ.
ರಚನೆಯಾದ ಈ ಗೀತೆಯನ್ನು ಧ್ವನಿ ಸುರಳಿ ರೂಪದಲ್ಲಿ ತಂದು, ಕಾವೇರಿ ಆರತಿ ಸಂದರ್ಭದಲ್ಲಿ ಬರುವ ಭಕ್ತಾದಿಗಳಿಗೆ ಕಣ್ಣು ತುಂಬಿಕೊಳ್ಳುವಂತೆ ಮಾಡುವುದು ಇದರ ಪ್ರಮುಖ ಉದ್ದೇಶವಾಗಿದೆ. ಈ ಹಿನ್ನೆಲೆಯಲ್ಲಿ, ಕಾವೇರಿಯ ಮೆರುಗನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕಾವೇರಿ ಮಾತೆ ಹಾಗೂ ಕಾವೇರಿ ಆರತಿಗೆ ಸಂಬಂಧಿಸಿದಂತೆ ಗೀತ ರಚನೆ ಮಾಡುವಂತೆಯೂ, ಆಯ್ಕೆಯಾದ ಗೀತೆಯನ್ನು ಕಾವೇರಿ ಆರತಿ ಸಂದರ್ಭದಲ್ಲಿ ಪ್ರಸಾರ ಮಾಡಲಾಗುವುದು ಎಂದು ಡಿ.ಕೆ. ಶಿವಕುಮಾರ್ ಅವರು ಪತ್ರದಲ್ಲಿ ತಿಳಿಸಿದ್ದಾರೆ.
ಈ ಮೂಲಕ ಕಾವೇರಿ ನದಿಯ ಮಹತ್ವವನ್ನು ಸಾಂಸ್ಕೃತಿಕವಾಗಿ ಎತ್ತಿ ಹಿಡಿಯುವ ಮತ್ತು ಭಕ್ತಾದಿಗಳಲ್ಲಿ ಭಕ್ತಿ ಭಾವವನ್ನು ಹೆಚ್ಚಿಸುವ ಗುರಿಯನ್ನು ಹೊಂದಿದೆ ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು