11:13 AM Thursday16 - October 2025
ಬ್ರೇಕಿಂಗ್ ನ್ಯೂಸ್
ನರೇಗಾ ಯೋಜನೆಯಡಿ ಕಾರ್ಮಿಕ ಆಯವ್ಯಯ: ಗ್ರಾಮ ಪಂಚಾಯತಿಗಳಿಗೆ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ Kodagu | ತುಲಾ ಸಂಕ್ರಮಣ: ತಲಕಾವೇರಿಗೆ ಭಾಗಮಂಡಲದ ಭಗಂಡೇಶ್ವರ ದೇವಾಲಯದಿಂದ ಆಭರಣ ಕಾವೇರಿಮನೆ ಚಂದನ್ ಗೆ ಯುಎನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಪ್ರಶಸ್ತಿ ಪ್ರದಾನ ಇಡೀ ರಾಜ್ಯಕ್ಕೆ ಸುಭಿಕ್ಷೆ, ಶಾಂತಿ, ನೆಮ್ಮದಿ, ಮಳೆ- ಬೆಳೆ-ರೈತರ ಸಮೃದ್ಧಿಗಾಗಿ ಹಾಸನಾಂಬೆಗೆ ಪ್ರಾರ್ಥನೆ… ಮೆಡಿಕಲ್‌ ಅಗತ್ಯತೆಗೆ ಪೂರೈಕೆಗೆ ಡ್ರೋನ್‌ ಬಳಕೆಗೆ ಚಾಲನೆ: ಏರ್‌ಬೌಂಡ್‌ ಸಂಸ್ಥೆಯಿಂದ ಡ್ರೋನ್‌ ಮೂಲಕ… Shivamogga | ತೀರ್ಥಹಳ್ಳಿ ಬಾಳೆಬೈಲು ಬಳಿ ಭೀಕರ ಅಪಘಾತ: ಓರ್ವ ಸ್ಥಳದಲ್ಲೇ ಸಾವು ಮಡಿಕೇರಿಯ ಚೇರಂಬಾಣೆಯಲ್ಲಿ ಅಸ್ಸಾಂ ಕಾರ್ಮಿಕರಿಗೆ ಸ್ಥಳೀಯನಿಂದ ಗೋವು ಮಾಂಸ ಮಾರಾಟ: ಆರೋಪಿ ಅರೆಸ್ಟ್ ವಿಜ್ಞಾನ ಓದಿಯೂ ಮೌಡ್ಯ ನಂಬುತ್ತೀರಿ ಅಂದರೆ ನೀವು ಓದಿದ್ದೇ ದಂಡ: ಸಿಎಂ ಸಿದ್ದರಾಮಯ್ಯ Chikkamagaluru | ಬಿಂಡಿಗ ದೇವೀರಮ್ಮನ ಜಾತ್ರಾ ಮಹೋತ್ಸ: ಬೆಟ್ಟವೇರಲಿರುವ ಭಕ್ತ ಸಾಗರ; ಜಿಲ್ಲಾಡಳಿತದಿಂದ… ಅಕ್ರಮ ಗೋವು ಸಾಗಾಟ ಮಾಡುತ್ತಿದ್ದ ವಾಹನ ಪಲ್ಟಿ: ಗಾಯಗೊಂಡ ಗೋವುಗಳನ್ನು ಬಿಟ್ಟು ಆರೋಪಿಗಳು…

ಇತ್ತೀಚಿನ ಸುದ್ದಿ

ವಿದ್ಯುತ್‌ ಸಮಸ್ಯೆಗೆ ಕುಸುಮ್ ಯೋಜನೆ ಪರಿಹಾರ: ಇಂಧನ ಸಚಿವ ಕೆ.ಜೆ. ಜಾರ್ಜ್

04/09/2024, 21:59

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ವಿದ್ಯುತ್ ಸಮಸ್ಯೆಯ ಶಾಶ್ವತ ಪರಿಹಾರಕ್ಕಾಗಿ ರಾಜ್ಯದಲ್ಲಿ ಕುಸುಮ್ ಬಿ ಮತ್ತು ಕುಸುಮ್ ಸಿ ಯೋಜನೆಗಳ ಅನುಷ್ಠಾನಕ್ಕೆ ಆದ್ಯತೆ ನೀಡಲಾಗುತ್ತಿದ್ದು, ಕೋಲಾರದಂತಹ ಜಿಲ್ಲೆಗಳಿಗೆ ಇದು ಹೆಚ್ಚು ಪ್ರಯೋಜನಕಾರಿಯಾಗಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಇಂಧನ ಇಲಾಖೆಗೆ ಸಂಬಂಧಿಸಿದಂತೆ ಜಿಲ್ಲೆಯ ಚುನಾಯಿತ ಪ್ರತಿನಿಧಿಗಳು ಹಾಗೂ ಬೆಸ್ಕಾಂ ಮತ್ತು ಕೆಪಿಟಿಸಿಎಲ್ ಅಧಿಕಾರಿಗಳ ಜತೆ ಸಭೆ ನಡೆಸಿದ ಸಚಿವರು, ಕುಸುಮ್ ಬಿ ಯೋಜನೆಯಡಿ ಸೋಲಾರ್ ಪಂಪ್ ಸೆಟ್ ಗಳನ್ನು ಅಳವಡಿಸಲಾಗುತ್ತಿದೆ. ಇದಕ್ಕೆ ಕೇಂದ್ರ ಸರ್ಕಾರದಿಂದ ಶೇ.30 ಮತ್ತು ರಾಜ್ಯ ಸರ್ಕಾರದಿಂದ ಶೇ.50ರಷ್ಟು ಸಬ್ಸಿಡಿ ನೀಡಲಾಗುತ್ತಿದೆ. ಒಟ್ಟು ವೆಚ್ಚದ ಶೇ.20ನ್ನು ಫಲಾನುಭವಿಗಳು ಭರಿಸಿದರೆ ರೈತರಿಗೆ ಸರ್ಕಾರದಿಂದಲೇ ಪಂಪ್ ಸೆಟ್ ಗಳನ್ನು ಅಳವಡಿಸಿಕೊಡಲಾಗುವುದು ಎಂದರು.
ಅದೇ ರೀತಿ ಕುಸುಮ್ ಸಿ ಫೀಡರ್ ಸೋಲಾರೈಸೇಶನ್ ಯೋಜನೆಯಡಿ ಸೋಲಾರ್ ವಿದ್ಯುತ್ ಉತ್ಪಾದನಾ ಘಟಕಗಳನ್ನು ಸ್ಥಾಪಿಸಿ ಸಮೀಪದ ಸಬ್ ಸ್ಟೇಷನ್ ಗೆ ವಿದ್ಯುತ್ ಒದಗಿಸಲಾಗುತ್ತದೆ. ಆಯಾ ಸಬ್ ಸ್ಟೇಷನ್ ವ್ಯಾಪ್ತಿಯಲ್ಲೇ ಆ ವಿದ್ಯುತ್ ಪೂರೈಕೆಯಾಗುವುದರಿಂದ ಗ್ರಾಹಕರಿಗೆ ವಿದ್ಯುತ್ ಸಮಸ್ಯೆ ಇಲ್ಲದಂತಾಗುತ್ತದೆ. ಈ ನಿಟ್ಟಿನಲ್ಲಿ ಜಿಲ್ಲೆಯಾದ್ಯಂತ ಸೋಲಾರ್ ಘಟಕಗಳನ್ನು ಸ್ಥಾಪಿಸಲಾಗುವುದು. ಒಂದು ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆಗೆ 4 ಎಕರೆ ಜಮೀನು ಬೇಕಿದ್ದು, ಖಾಸಗಿ ಭೂಮಿಗೆ ಪ್ರತಿ ಎಕರೆಗೆ ವಾರ್ಷಿಕ ರೂ.25 ಸಾವಿರ ನೀಡಲಾಗುತ್ತದೆ. ಸರ್ಕಾರಿ ಭೂಮಿಯಾದರೆ ಇಂಧನ ಇಲಾಖೆಯಿಂದ ಜಿಲ್ಲಾಧಿಕಾರಿಗಳ ಬಳಿ ಪ್ರತಿ ಎಕರೆಗೆ ರೂ.25 ಸಾವಿರ ಠೇವಣಿ ಇಟ್ಟು ಆ ಮೊತ್ತವನ್ನು ಆ ಭಾಗದ ಅಂಗನವಾಡಿ, ಶಾಲೆಗಳಿಗೆ ಮೂಲ ಸೌಕರ್ಯ ಕಲ್ಪಿಸಲು ವೆಚ್ಚ ಮಾಡಲಾಗುವುದು ಎಂದು ತಿಳಿಸಿದರು.
ರಾಜ್ಯದಲ್ಲಿ ಪ್ರಸ್ತುತ ಬೇಡಿಕೆಗಿಂತ ಹೆಚ್ಚು ವಿದ್ಯುತ್ ಲಭ್ಯವಿದೆ. ಅದರ ಸಮರ್ಪಕ ಪೂರೈಕೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಹೆಚ್ಚುವರಿ ಸಬ್ ಸ್ಟೇಷನ್‌ ಗಳ ನಿರ್ಮಾಣ, ಟ್ರಾನ್ಸ್ ಫಾರಂಗಳ ಉನ್ನತೀಕರಣ ಮುಂತಾದ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಹೆಚ್ಚುವರಿ ವಿದ್ಯುತ್ ಅಗತ್ಯವಿದ್ದರೆ ವಿದ್ಯುತ್ ಖರೀದಿ ಬದಲು ಇತರೆ ರಾಜ್ಯಗಳೊಂದಿಗೆ ವಿದ್ಯುತ್ ವಿನಿಮಯ ಮಾಡಿಕೊಂಡು ಇಲಾಖೆಗೆ ಹೊರೆಯಾದಗದಂತೆ ನೋಡಿಕೊಳ್ಳಲಾಗುತ್ತಿದೆ ಎಂದು ಹೇಳಿದರು.
ರಾಜ್ಯದಲ್ಲಿ ಗೃಹಜ್ಯೋತಿ ಯೋಜನೆ ಜಾರಿಯಲ್ಲಿರುವುದರಿಂದ ಕೇಂದ್ರ ಸರ್ಕಾರದ ಸೂರ್ಯ ಘರ್ ಯೋಜನೆಗೆ ಅಷ್ಟೊಂದು ಬೇಡಿಕೆ ಇಲ್ಲ. ಇದರ ಹೊರತಾಗಿಯೂ ಸೂರ್ಯ ಘರ್ ಯೋಜನೆ ಕುರಿತಂತೆ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಜನ ಜಾಗೃತಿ ಮೂಡಿಸಲಾಗುವುದು ಎಂದು ಸಚಿವರು ಮಾಹಿತಿ ನೀಡಿದರು.
ಅಧಿಕಾರಿಗಳು *ಜನಪ್ರತಿನಿಧಿಗಳೊಂದಿಗೆ ಸಂರ್ಕದಲ್ಲಿರಬೇಕು:* ಸಭೆಯಲ್ಲಿ ಜಿಲ್ಲೆಯ ಶಾಸಕರು ತಮ್ಮ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಕೆಲವು ಸಮಸ್ಯೆಗಳನ್ನು ಹೇಳಿಕೊಂಡಾಗ ಪ್ರತಿಕ್ರಿಯಿಸಿದ ಸಚಿವರು, ಜನತೆ ತಮ್ಮ ಸಮಸ್ಯೆಗಳನ್ನು ನೇರವಾಗಿ ಶಾಸಕರೊಂದಿಗೆ ಹೇಳಿಕೊಳ್ಳುತ್ತಾರೆ. ಹೀಗಾಗಿ ಅವರಿಗೆ ಸಮಸ್ಯೆಯ ಬಗ್ಗೆ ಅರಿವಿರುತ್ತದೆ. ಆದ್ದರಿಂದ ವಿದ್ಯುತ್ ಪೂರೈಕೆಗೆ ಸಂಬಂಧಿಸಿದಂತೆ ಬೆಸ್ಕಾಂ ಎಂಜಿನಿಯರ್ ಗಳು ತಮ್ಮ ವ್ಯಾಪ್ತಿಯ ಶಾಸಕರ ಜತೆ ಸಂಪರ್ಕದಲ್ಲಿದ್ದು, ಅವರ ಸಲಹೆಗಳನ್ನು ಪಡೆದು ಕೆಲಸ ನಿರ್ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲೆಯ ಅಂಚಿನಲ್ಲಿ ಇರುವ ಕೆಲವು ಗ್ರಾಮಗಳಲ್ಲಿ ಅವಿರತ ವಿದ್ಯುತ್ ಸಂಪರ್ಕ ಒದಗಿಸಲು ಸಾಧ್ಯವಾಗದಿದ್ದಲ್ಲಿ ಪರ್ಯಾಯ ಇಂಧನ ವ್ಯವಸ್ಥೆಗಳಾದ ಪವನ ವಿದ್ಯುತ್ ಅಥವಾ ಸೌರ ವಿದ್ಯುತ್ ವ್ಯವಸ್ಥೆ ಮಾಡಿಕೊಡಲಾಗುವುದು. ಇದಕ್ಕಾಗಿ ಕೇಂದ್ರ ಸರ್ಕಾರದ ಯೋಜನೆಯನ್ನು ಬಳಸಿಕೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು.
ಸಭೆಯ ನಂತರ ಕೋಲಾರದ ಹೊಳಲಿ ಬಳಿ ಕೊಚಿಮುಲ್‌ಗೆ ಸೇರಿದ 50 ಎಕರೆ ಸ್ಥಳದಲ್ಲಿ ನಿರ್ಮಾಣವಾಗುತ್ತಿರುವ 12 ಮೆ. ವ್ಯಾ ಸೋಲಾರ್ ವಿದ್ಯುತ್ ಸ್ಥಾವರ ದ ಪರಿಶೀಲನೆ ನಡೆಸಿದರು.
ಸಭೆಯಲ್ಲಿ ಸಂಸದ ಮಲ್ಲೇಶ್ ಬಾಬು, ವಿಧಾನ ಪರಿಷತ್ ಸದಸ್ಯರೂ ಆಗಿರುವ ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಕೋಲಾರ ಶಾಸಕ ಕೊತ್ತೂರು ಜಿ. ಮಂಜುನಾಥ್, ಮಾಲೂರು ಶಾಸಕ ಕೆ.ವೈ.ನಂಜೇಗೌಡ, ಶ್ರೀನಿವಾಸಪುರ ಶಾಸಕ ಜಿ.ಕೆ.ವೆಂಕಟಾಶಿವಾರೆಡ್ಡಿ, ವಿಧಾನ ಪರಿಷತ್ ಸದಸ್ಯ ಅನಿಲ್ ಕುಮಾರ್, ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಗೌರವ ಗುಪ್ತಾ, ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ್ ಬೀಳಗಿ, ಜಿಲ್ಲಾಧಿಕಾರಿ ಅಕ್ರಂ ಪಾಷ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ನಿಖಿಲ್ ಸೇರಿದಂತೆ ಇಂಧನ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು