7:38 AM Tuesday20 - January 2026
ಬ್ರೇಕಿಂಗ್ ನ್ಯೂಸ್
ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ

ಇತ್ತೀಚಿನ ಸುದ್ದಿ

‘ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್’: ಯೋಜನೆಗೆ ಚಾಲನೆ’: ಬರುವ ಡಿಸೆಂಬರ್ ವೇಳೆಗೆ 41, 849 ಕೆರೆಗಳ ಒತ್ತುವರಿ ತೆರವು

09/10/2025, 22:57

ಬೆಂಗಳೂರು(reporterkarnataka.com): ಬರುವ ಡಿಸೆಂಬರ್ ವೇಳೆಗೆ 41, 849 ಕೆರೆಗಳ ಒತ್ತುವರಿ ತೆರವುಗೊಳಿಸಿ ನೀರು ತುಂಬಿಸುವ ಕೆಲಸ ಮಾಡುವ ಮೂಲಕ ಅಂತರ್ಜಲ ವೃದ್ಧಿಗೆ ವಿಶೇಷ ಆದ್ಯತೆ ನೀಡಲಾಗುವುದು ಎಂದು
ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್. ಎಸ್. ಭೋಸರಾಜು ಹೇಳಿದ್ದಾರೆ.


ವಿಧಾನಸೌಧದ ಬಾಂಕ್ವೆಟ್ ಹಾಲ್ ನಲ್ಲಿ *“ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್*: ಯೋಜನೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ರಾಜ್ಯದಲ್ಲಿ 35 ಸಾವಿರಕ್ಕೂ ಅಧಿಕ ಕೆರೆಗಳ ಒತ್ತುವರಿ ತೆರವುಗೊಳಿಸಲಾಗಿದ್ದು, ಈ ನಿಟ್ಟಿನಲ್ಲಿ ಪ್ರತಿ ತಿಂಗಳು ಪ್ರಗತಿ ಪರಿಶೀಲನೆ ಮಾಡಲಾಗುತ್ತಿದೆ.
ಎಚ್.ಎನ್. ವ್ಯಾಲಿ, ಕೆ.ಸಿ. ವ್ಯಾಲಿ ಭಾಗದಲ್ಲಿ ಕೆರೆಗಳಿಗೆ ನೀರು ತುಂಬಿಸಿದ ಪರಿಣಾಮ ಅಂತರ್ಜಲ ವೃದ್ಧಿಯಾಗಿದೆ. ಇದೀಗ ಪ್ರತಿ ವರ್ಷ 1018 ಕೆರೆಗಳಿಗೆ ನೀರು ತುಂಬಿಸುತ್ತಿದ್ದು, 25 ಲಕ್ಷ ಎಕರೆಗೆ ಸಣ್ಣ ನೀರಾವರಿ ಇಲಾಖೆಯಿಂದ ನೀರು ಪೂರೈಸಲಾಗುತ್ತಿದೆ. ಜೊತೆಗೆ ಎಲ್ಲಾ ಕೆರೆಗಳನ್ನು ಸೊಸೈಟಿಗಳ ಮೂಲಕ ಪುನರುಜ್ಜೀವನಗೊಳಿಸಲಾಗಿದೆ. ಅಂತರ್ಜಲ ಸುಧಾರಣೆಗೆ ಒತ್ತು ನೀಡುತ್ತಿದ್ದೇವೆ ಎಂದರು.
ಅಂತರ್ಜಲ ಇಲಾಖೆ ಮೂಲಕ ರಾಜ್ಯದ 2714 ಪ್ರದೇಶಗಳಲ್ಲಿ ಪ್ರತಿ ಆರು ಗಂಟೆಗೊಮ್ಮೆ ಅಂತರ್ಜಲದ ಬಗ್ಗೆ ಮಾಹಿತಿ ಪಡೆಯಲಾಗುತ್ತಿದೆ. ರಾಜ್ಯದಲ್ಲಿ ಶೇ 60 ರಷ್ಟು ಕೃಷಿ ಚಟುವಟಿಕೆ ಕೊಳವೆ ಬಾವಿ ಮೂಲಕ ನಡೆಯುತ್ತಿದೆ. ಪ್ರತಿ ನಾಲ್ಕೈದು ವರ್ಷಗಳಿಗೊಮ್ಮೆ ಬರಗಾಲ ಪರಿಸ್ಥಿತಿ ಎದುರಾಗುತ್ತಿದ್ದು, ಪ್ರಾಕೃತಿಕ ವಿಕೋಪದ ಸಮಸ್ಯೆ ತೀವ್ರವಾಗಿದೆ. ಮಳೆಯಾಶ್ರಿತ ಕೃಷಿಯಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ಅಂತರ್ಜಲ ಬಳಕೆಯಲ್ಲಿ 10 ನೇ ಸ್ಥಾನದಲ್ಲಿದೆ ಎಂದರು.
ಅಂತರ್ಜಲ ಪ್ರಮಾಣ ಸರಿಪಡಿಸದಿದ್ದರೆ ಬರುವ ದಿನಗಳಲ್ಲಿ ನಾವು ಸಂಕಷ್ಟಕ್ಕೆ ಸಿಲುಕುತ್ತೇವೆ. 44 ತಾಲ್ಲೂಕುಗಳಲ್ಲಿ ಅಂತರ್ಜಲ ಅತಿಯಾಗಿ ದುರ್ಬಳಕೆಯಾಗುತ್ತಿದೆ. ಸಿದ್ದರಾಮಯ್ಯ ಅವರ ಆಡಳಿತಾವಧಿಯಲ್ಲಿ 8 ಸಾವಿರಕ್ಕೂ ಅಧಿಕ ಸಣ್ಣ ನೀರಾವರಿ ಯೋಜನೆಗಳನ್ನು ಜಾರಿಗೊಳಿಸಿ ಅಂತರ್ಜಲ ಹೆಚ್ಚಿಸಲು ಕ್ರಮ ತೆಗೆದುಕೊಂಡಿದ್ದೇವೆ ಎಂದು ನುಡಿದರು.
ಕಾನೂನು, ಸಂಸದೀಯ ಮತ್ತು ಪ್ರವಾಸೋದ್ಯಮ ಸಚಿವ ಹೆಚ್.ಕೆ. ಪಾಟೀಲ್ ಮಾತನಾಡಿ, ರಾಜ್ಯದಲ್ಲಿ ಪಂಚ ಗ್ಯಾರೆಂಟಿ ಯೋಜನೆಗಳನ್ನು ಜಾರಿಗೊಳಿಸಿದ್ದು, ಇದೀಗ ನೀರಿನ ಗ್ಯಾರೆಂಟಿ ಕೊಡುವುದು ಅತ್ಯಂತ ಅಗತ್ಯವಾಗಿದೆ. ಯಾರ ಕಣ್ಣಿಂದ ನೀರು ಬರುವುದಿಲ್ಲ ಅಂತಹವರು ಹಣದ ಬಗ್ಗೆ ವಿಚಾರ ಮಾಡುತ್ತಾರೆ. ಕಣ್ಣಲ್ಲಿ ನೀರು ಬಂದವರು ರೈತರ ಬಗ್ಗೆ ಆಲೋಚಿಸುತ್ತಾರೆ. ಆದರೆ ನಮ್ಮ ಸರ್ಕಾರ ರೈತರ ಶ್ರೇಯೋಭಿವೃದ್ದಿಗೆ ಒತ್ತು ನೀಡುತ್ತಿದೆ. ಸಚಿವ ಎಸ್.ಎನ್. ಬೋಸರಾಜು ಸಣ್ಣ ನೀರಾವರಿ ಇಲಾಖೆಗೆ ವಿಶೇಷ ಆದ್ಯತೆ ನೀಡಿದ್ದು, ರಾಜ್ಯವನ್ನು ಜಲ ಸಂಪದ್ಭರಿತಗೊಳಿಸಲು ಮುಂದಾಗಿದ್ಧಾರೆ ಎಂದು ಹೇಳಿದರು.
ವಾಟರ್ ಮ್ಯಾನ್ ಅಪ್ ಇಂಡಿಯಾ, ಜಲಸಂರಕ್ಷಣೆ ತಂತ್ರಜ್ಞರಾದ ಮ್ಯಾಗ್ಸಸೆ ಪ್ರಶಸ್ತಿ ಪುರಸ್ಕತ ರಾಜೇಂದ್ರ ಸಿಂಗ್ ಮಾತನಾಡಿ, ತಾವು ಚೆಂಬಲ್ ಕಣಿವೆಯಲ್ಲಿ ಜಲ ಸಂರಕ್ಷಣೆಗೆ ಒತ್ತು ನೀಡಿದ್ದು, ಅಲ್ಲಿ ಡಕಾಯಿತರು ಬಂದೂಕು ತೊರೆದು ಚಳವಳಿಯ ಭಾಗವಾಗಿದ್ದಾರೆ. ರಾಜ್ಯದಲ್ಲಿ ವಿಕೇಂದ್ರೀಕೃತವಾಗಿ ಅಂತರ್ಜಲ ಅಭಿವೃದ್ದಿಗೆ ಒತ್ತು ನೀಡಬೇಕಾಗಿದೆ ಎಂದು ಅವರು ನುಡಿದರು.
ಸಣ್ಣ ನೀರಾವರಿ ಇಲಾಖೆಯ ರಾಯಭಾರಿ, ನಟ ವಶಿಷ್ಟ ಸಿಂಹ ಮಾತನಾಡಿ, ಪ್ರಸ್ತುತ ಕುಡಿಯುವ ಮತ್ತು ಗೃಹ ಬಳಕೆಗೆ ಹಣ ಕೊಟ್ಟು ಖರೀದಿಸುವ ಪರಿಸ್ಥಿತಿ ಇದೆ. ಊರಿನಲ್ಲಿ ಒಂದು ಕೆರೆ ಇದ್ದರೆ ಆ ಊರು ಬೆಳವಣಿಗೆ ಸಾಧಿಸುತ್ತದೆ. ನೀರಿನ ಬಗ್ಗೆ ನಿಷ್ಕಾಳಜಿ ತೋರಿದ ಪರಿಣಾಮ ನಾವು ಅಭಾವ ಪರಿಸ್ಥಿತಿಯನ್ನು ಎದುರಿಸುತ್ತಿದ್ದೇವೆ. ಮುಂಬರುವ ಪೀಳಿಗೆಗೆ ಆಸ್ತಿಯಲ್ಲ, ನೀರಿನ ಸಂರಕ್ಷಣೆಯ ಮೂಲಕ ಮಹತ್ವದ ಕೊಡುಗೆ ನೀಡಬೇಕಾಗಿದೆ ಎಂದರು.
ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಯೋಜನೆ ಉದ್ಘಾಟಿಸಿದರು. ಸಚಿವರಾದ, ಈಶ್ವರ್ ಖಂಡ್ರೆ, ಎಚ್.ಸಿ. ಮಹದೇವಪ್ಪ ಯೋಜನಾ ಆಯೋಗದ ಉಪಾಧ್ಯಕ್ಷರಾದ ಬಿ.ಆರ್. ಪಾಟೀಲ್, ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಶಾಸಕರಾದ ಅಜಯ್ ಸಿಂಗ್, ರಿಜ್ವಾನ್ ಅರ್ಷದ್, ಎಂ.ವೈ ಪಾಟೀಲ್, ಎ ಆರ್ ಕೃಷ್ಣಮೂರ್ತಿ, ಹಂಪಯ್ಯ ನಾಯಕ್, ಭಾಗೀರಥಿ ಮುರುಳ್ಯ, ಬಸನಗೌಡ ತುರುವಿಹಾಳ್ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು